ದುಷ್ಕರ್ಮಿಗಳನ್ನು ಬಂಧಿಸಿ, ಮರಣದಂಡನೆ ಶಿಕ್ಷೆ ವಿಧಿಸಿ ; ಬೇಡಜಂಗಮ ಸಮಾಜ ಆಗ್ರಹ
ಬಳ್ಳಾರಿ, ಮಾ. 28:
ವೀರಶೈವ ಲಿಂಗಾಯತ ಬೇಡಜಂಗಮ ಸಮಾಜದ ಪಿಯುಸಿ ವಿದ್ಯಾರ್ಥಿಯನ್ನು ಸಾಮೂಹಿಕವಾಗಿ ಅತ್ಯಾಚಾರ ಮಾಡಿ, ಕೊಲೆ ಮಾಡಿರುವ ದುಷ್ಕರ್ಮಿಗಳಿಗೆ ಮರಣದಂಡನೆ ಶಿಕ್ಷೆ ವಿಧಿಸಲು ಆಗ್ರಹಿಸಿ ಬಳ್ಳಾರಿ ಜಿಲ್ಲಾ ವೀರಶೈವ ಜಂಗಮ ಅರ್ಚಕರ ಮತ್ತು ಪುರೋಹಿತರ ಸಂಘ ಸರ್ಕಾರಕ್ಕೆ ಆಗ್ರಹಿಸಿದೆ.
ಬಳ್ಳಾರಿ ಜಿಲ್ಲಾ ವೀರಶೈವ ಜಂಗಮ ಅರ್ಚಕರ ಮತ್ತು ಪುರೋಹಿತರ ಸಂಘದ ಅಧ್ಯಕ್ಷ ಬಿ.ಎಂ. ಈಶ್ವರಯ್ಯಸ್ವಾಮಿ ಅವರ ನೇತೃತ್ವದಲ್ಲಿ ಸಂಘದ ಪದಾಧಿಕಾರಿಗಳು ಜಿಲ್ಲಾಡಳಿತದ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಿದ್ದು, ತಪ್ಪಿತಸ್ಥರ ವಿರುದ್ಧ ಕ್ರಮಕೈಗೊಳ್ಳಬೇಕು ಎಂದು ಒತ್ತಾಯಿಸಿದ್ದಾರೆ.
ಬಿ.ಎಂ. ಈಶ್ವರಯ್ಯಸ್ವಾಮಿ ಅವರು ಸುದ್ದಿಗಾರರ ಜೊತೆ ಮಾತನಾಡಿ, ರಾಮನಗರದ ಉಪ ವಿಭಾಗದ ವ್ಯಾಪ್ತಿಯ ಕಗ್ಗಲೀಪುರ ಗ್ರಾಮದ ವ್ಯಾಪ್ತಿಯಲ್ಲಿ ದುರ್ಘಟನೆ ನಡೆದಿದ್ದು, ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ದುಷ್ಕರ್ಮಿಗಳು ಯುವತಿಯ ಮೇಲೆ ಸಾಮೂಹಿಕ ಅತ್ಯಾಚಾರ ನಡೆಸಿ, ಕೊಲೆ ಮಾಡಿದ್ದು ಅಮಾನುಶವಾಗಿ ವರ್ತಿಸಿದ್ದಾರೆ. ಇಡೀ ಘಟನೆಯು ಅಮಾನವೀಯವಾಗಿದ್ದು ದುಷ್ಕರ್ಮಿಗಳಿಗೆ ಕಠಿಣವಾದ ಮರಣದಂಡನೆ ಶಿಕ್ಷೆ ವಿಧಿಸುವ ಮೂಲಕ ಎಲ್ಲಾ ಹೆಣ್ಣಮಕ್ಕಳು – ಯುವತಿಯರಿಗೆ ಸರ್ಕಾರ ಭದ್ರತೆಯ ಭರವಸೆ ನೀಡಬೇಕು ಎಂದು ಆಗ್ರಹಿಸಿದ್ದರು.
ಸಂಘದ ಕಾರ್ಯದರ್ಶಿ ಜೆ.ಎಚ್.ಎಂ. ಸಿದ್ದರಾಮಯ್ಯ ಅವರು ಮಾತನಾಡಿ, ಆರೋಪಿಗಳನ್ನು ಪೊಲೀಸರು ತಕ್ಷಣವೇ ಬಂಧಿಸಬೇಕು. ಇಲ್ಲವಾದಲ್ಲಿ ಚುನಾವಣೆಯ ಸಂದರ್ಭದಲ್ಲಿ ಆಡಳಿತ ಪಕ್ಷದ ವಿರುದ್ಧ ಚುನಾವಣಾ ವಿಷಯವಾಗಿ ಮತದಾನದ ಸಂದರ್ಭದಲ್ಲಿ ಕರ್ನಾಟಕದಾದ್ಯಂತ ಪ್ರಭಾವ ಬೀರಲಿದೆ ಎಂದು ಎಚ್ಚರಿಸಿದರು.
ಬಳ್ಳಾರಿ ಜಿಲ್ಲಾ ವೀರಶೈವ ಜಂಗಮ ಅರ್ಚಕರ ಮತ್ತು ಪುರೋಹಿತರ ಸಂಘದ ಜಿಲ್ಲಾ ಸಂಘಟನಾ ಕಾರ್ಯದರ್ಶಿ ಎಸ್.ಎಂ. ಪ್ರಕಾಶ್ ಶಾಸ್ತ್ರಿ ಇನ್ನಿತರ ಪದಾಧಿಕಾರಿಗಳು ಉಪಸ್ಥಿತರಿದ್ದರು.