- NH-150A ರಸ್ತೆ ಹಾಗೂ ಸೇತುವೆ ಕಾಮಗಾರಿಗಳ ವಿಳಂಬ: ಸಂಸದ ಡಾ. ಸೈಯ್ಯದ್ ನಾಸೀರ್ ಹುಸೇನ್ ಅವರ ಪತ್ರಕ್ಕೆ ಕೇಂದ್ರ ಸಚಿವ ನಿತಿನ್ ಗಡ್ಕರಿ ಸ್ಪಂದನ
ಬಳ್ಳಾರಿ(28)
ಕರ್ನಾಟಕದಲ್ಲಿ ರಾಷ್ಟ್ರೀಯ ಹೆದ್ದಾರಿ-150A (NH-150A) ವ್ಯಾಪ್ತಿಯಲ್ಲಿ ನಡೆಯುತ್ತಿರುವ ರಸ್ತೆ ಹಾಗೂ ಸೇತುವೆ ಕಾಮಗಾರಿಗಳ ವಿಳಂಬದ ಕುರಿತು ರಾಜ್ಯಸಭಾ ಸದಸ್ಯರಾದ ಡಾ. ಸೈಯ್ಯದ್ ನಾಸೀರ್ ಹುಸೇನ್ ಅವರು ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವರಾದ ಶ್ರೀ ನಿತಿನ್ ಗಡ್ಕರಿ ಅವರಿಗೆ ದಿನಾಂಕ 31/03/2026 ರಂದು ಪತ್ರ ಬರೆದು ಕಾಮಗಾರಿಗಳನ್ನು ತ್ವರಿತಗತಿಯಲ್ಲಿ ಪೂರ್ಣಗೊಳಿಸುವಂತೆ ಒತ್ತಾಯಿಸಿದ್ದರು.
ಸಂಸದರ ಪತ್ರಕ್ಕೆ ಪ್ರತಿಕ್ರಿಯಿಸಿರುವ ಕೇಂದ್ರ ಸಚಿವ ನಿತಿನ್ ಗಡ್ಕರಿ ಅವರು, ಕಾಮಗಾರಿಗಳ ವಿಳಂಬಕ್ಕೆ ಮುಖ್ಯವಾಗಿ ಗುತ್ತಿಗೆದಾರರ ಕಳಪೆ ಕಾರ್ಯನಿರ್ವಹಣೆ ಕಾರಣವಾಗಿದೆ ಎಂದು ತಿಳಿಸಿದ್ದಾರೆ.
ಕಾಮಗಾರಿಗಳ ಪ್ರಗತಿಯನ್ನು ರಸ್ತೆ ಅಭಿವೃದ್ಧಿ ವಿಭಾಗದ ಮಹಾನಿರ್ದೇಶಕರು ಹಾಗೂ ವಿಶೇಷ ಕಾರ್ಯದರ್ಶಿಗಳು ಪರಿಶೀಲಿಸಿದ್ದು, ಅಗತ್ಯ ಮಾನವ ಸಂಪನ್ಮೂಲ ಮತ್ತು ಯಂತ್ರೋಪಕರಣಗಳನ್ನು ಸಮರ್ಪಕವಾಗಿ ನಿಯೋಜಿಸಿ ಕಾಮಗಾರಿಯನ್ನು ತ್ವರಿತಗೊಳಿಸುವಂತೆ ಗುತ್ತಿಗೆದಾರರಿಗೆ ಕಟ್ಟುನಿಟ್ಟಿನ ಸೂಚನೆ ನೀಡಲಾಗಿದೆ. ವಿಳಂಬ ಮುಂದುವರಿದಲ್ಲಿ ಒಪ್ಪಂದದ ನಿಯಮಗಳನ್ವಯ ಕ್ರಮ ಕೈಗೊಳ್ಳಲಾಗುವುದು ಎಂದೂ ಸಚಿವರು ತಿಳಿಸಿದ್ದಾರೆ.
ಸಾರ್ವಜನಿಕರಿಗೆ ತೊಂದರೆಯಾಗುತ್ತಿರುವ ಪ್ರದೇಶಗಳಿಗೆ ವಿಶೇಷ ಆದ್ಯತೆ ನೀಡಿ ಕಾಮಗಾರಿಗಳ ಪ್ರಗತಿಯನ್ನು ನಿಕಟವಾಗಿ ಮೇಲ್ವಿಚಾರಣೆ ಮಾಡುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಲಾಗಿದೆ. ಅಲ್ಲದೆ, ಬಾಕಿ ಉಳಿದ ಕಾಮಗಾರಿಗಳನ್ನು ಶೀಘ್ರ ಪೂರ್ಣಗೊಳಿಸಲು ರಾಜ್ಯ ಲೋಕೋಪಯೋಗಿ ಇಲಾಖೆ/ಅನುಷ್ಠಾನ ಸಂಸ್ಥೆಯೊಂದಿಗೆ ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವಾಲಯ ನಿರಂತರವಾಗಿ ಕ್ರಮ ವಹಿಸಲಿದೆ ಎಂದು ಸಚಿವ ನಿತಿನ್ ಗಡ್ಕರಿ ಅವರು ಸಂಸದರಿಗೆ ಬರೆದ ಪತ್ರದಲ್ಲಿ ಭರವಸೆ ನೀಡಿದ್ದಾರೆ.














